ಬೆಂಗಳೂರು(www.thenewzmirror.com): ಆಗಸ್ಟ್ 04 ರಿಂದ 06 ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ “ಶಾಸಕಾಂಗ ಶೃಂಗಸಭೆ 2025” ನಡೆಯಲಿದ್ದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ.
“ರಾಜ್ಯ ಶಾಸಕರ ರಾಷ್ಟ್ಟೀಯ ಸಮಾವೇಶ” ಹಾಗೂ “ರಾಷ್ಟ್ರೀಯ ಶಾಸಕರ ಸಮಾವೇಶ” ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ಈ ಶೃಂಗ ಸಭೆಯಲ್ಲಿ ಭಾರತ ದೇಶದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮೂರು ದಿನಗಳ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಶೃಂಗ ಸಭೆಯಲ್ಲಿ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.
ಶಾಸಕಾಂಗ ಶೃಂಗಸಭೆ 2025 ರಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಉಪಸಭಾಪತಿ ಎಂ.ಕೆ. ಪ್ರಾಣೇಶ್, ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಸಭಾನಾಯಕರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸ್ರಾಜು, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್, ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ವಿಧಾನ ಪರಿಷತ್ ಶಾಸಕರುಗಳಾದ ಭಾರತಿ ಶೆಟ್ಟಿ, ಭಲ್ಕೀಸ್ ಬಾನು, ಹೇಮಲತಾ ನಾಯಕ್, ಮತ್ತು ಮಂಜುನಾಥ ಭಂಡಾರಿ ಪಾಲ್ಗೊಳ್ಳಲಿದ್ದಾರೆ.
ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿರುವ ಸಭಾಪತಿ ಬಸವರಾಜ ಹೊರಟ್ಟಿರವರ ನೇತೃತ್ವದ ತಂಡ ಶಾಸಕಾಂಗ ಶೃಂಗಸಭೆ 2025 ರಲ್ಲಿ ಭಾಗವಹಿಸಿ ಪ್ರಸ್ತುತ ರಾಜಕೀಯ ಬೆಳವಣಿಗೆ ಮತ್ತು ನಾಡಿನ ಅಭಿವೃದ್ದಿಯಲ್ಲಿ ಶಾಸಕಾಂಗದ ಪಾತ್ರದ ಬಗ್ಗೆ ಅನೇಕ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಸದರಿ ಶೃಂಗ ಸಭೆಗೆ ದೇಶಾದ್ಯಂತ ನಾಮ ನಿರ್ದೇಶಿತ ಸಂಸದರು ಮತ್ತು ವಿಧಾನ ಮಂಡಲದ ಶಾಸಕರುಗಳು, ಸಚಿವರುಗಳು ಭಾಗವಹಿಸಲಿದ್ದಾರೆ. ಇದೇ ರೀತಿ ಜಗತ್ತಿನಾದ್ಯಂತ ರಾಜಕೀಯ ಧುರೀಣರು ಮತ್ತು ನೀತಿ ನಿರೂಪಕರು ಸೇರಿಂದತೆ ಸುಮಾರು 15,000ಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ಶೃಂಗ ಸಭೆಯಲ್ಲಿ ವಿವಿಧ ಪ್ರಕಾರದ ವಿಷಯಾಧಾರಿತ ಗೋಷ್ಠಿಗಳಲ್ಲಿ ಜಾಗತಿಕ ಪ್ರಸ್ತುತ ರಾಜಕೀಯ ವಿದ್ಯಾಮಾನಗಳು – ಯುವಕರ ಪಾತ್ರ, ಆಧುನಿಕ ತಂತ್ರಜ್ಞಾನದ ಆಧಾರಿತ ಬೆಳವಣಿಗೆಗಳ ಬಗ್ಗೆ ಚರ್ಚೆಗಳು ನಡೆಯಲಿವೆ.
ಶೃಂಗ ಸಭೆಯಲ್ಲಿ ನಡೆಸಲಾಗುವ ಚರ್ಚೆಗಳು ಮತ್ತು ವಿಚಾರ ಮಂಥನಗಳಿಂದ ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಶಾಸನ ಸಭೆಗಳಲ್ಲಿ ಧನಾತ್ಮಕ ಬದಲಾವಣೆಗಳನ್ನು ನಿರೀಕ್ಷಿಸಬಹುದಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿಯವರಾದ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.







