ಬೆಂಗಳೂರು(www.thenewzmirror.com): ರಾಜಧಾನಿಯ ಘನತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬೃಹತ್ ಹಗರಣ ನಡೆಸಲಾಗಿದೆ ಎಂದು ಆರೋಪಿಸಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬುಧವಾರ ಲೋಕಾಯುಕ್ತ ರಿಜಿಸ್ಟ್ರಾರ್ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ದೂರು ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಬೆಂಗಳೂರಿನ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಬರೋಬ್ಬರಿ 39,437 ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಅವರು, ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಲೋಕಾಯುಕ್ತ ಸಂಸ್ಥೆಯು ಭರವಸೆ ನೀಡಿದೆ ಎಂದರು.
ಗುತ್ತಿಗೆದಾರರ ಹಿತರಕ್ಷಣೆ ಮತ್ತು ಕಿಕ್ಬ್ಯಾಕ್ ಆರೋಪ:
ಕೇವಲ ಕಮಿಷನ್ ಪಡೆಯುವ ಉದ್ದೇಶದಿಂದಲೇ ಇಡೀ ಟೆಂಡರ್ ನಿಯಮಾವಳಿಗಳನ್ನು ಬದಲಾಯಿಸಲಾಗಿದೆ. ಟೆಂಡರ್ ಪರಿಶೀಲನೆಗಾಗಿ ರಚಿಸಲಾಗಿದ್ದ ಎರಡು ಉನ್ನತ ಸಮಿತಿಗಳ ತಾಂತ್ರಿಕ ಸಲಹೆಗಳನ್ನು ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ಕೇವಲ ಒಂದು ನಿರ್ದಿಷ್ಟ ಕಂಪನಿಗೆ ಅನುಕೂಲ ಮಾಡಿಕೊಡಲು ಅತಿ ಹೆಚ್ಚಿನ ಮೊತ್ತ ನಿಗದಿಪಡಿಸಿ, 30 ವರ್ಷಗಳ ದೀರ್ಘಾವಧಿಗೆ ಈ ಗುತ್ತಿಗೆಯನ್ನು ನೀಡಲಾಗಿದೆ. ಈ ವ್ಯವಸ್ಥಿತ ಭ್ರಷ್ಟಾಚಾರದಲ್ಲಿ ದೆಹಲಿ ಹಾಗೂ ಕರ್ನಾಟಕ ಕಾಂಗ್ರೆಸ್ ನಾಯಕರು ಜಂಟಿಯಾಗಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್ ಹೈಕಮಾಂಡ್ಗೆ ಕರ್ನಾಟಕವೇ ಎಟಿಎಂ:
ಸಿಲಿಕಾನ್ ಸಿಟಿ ಜನತೆಯ ತೆರಿಗೆ ಹಣವನ್ನು ಈ ಮೂಲಕ ಲೂಟಿ ಮಾಡಲಾಗುತ್ತಿದ್ದು, ಮುಖ್ಯಮಂತ್ರಿಗಳೇ ವೈಯಕ್ತಿಕ ಆಸಕ್ತಿ ವಹಿಸಿ ಈ ವಿವಾದಿತ ಟೆಂಡರ್ ಫೈಲ್ಗೆ ಸಹಿ ಹಾಕಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಕೇವಲ ಒಂದು ವಾರದಲ್ಲೇ ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಹಗರಣ ಬಯಲಿಗೆ ಬಂದಿದೆ ಎಂದು ಅವರು ಲೇವಡಿ ಮಾಡಿದರು. ಈ ಆರ್ಥಿಕ ಅಕ್ರಮದ ವಿರುದ್ಧ ಮುಂಬರುವ ಅಧಿವೇಶನದಲ್ಲಿ ಧ್ವನಿ ಎತ್ತುವುದರ ಜೊತೆಗೆ ಸದನದ ಹೊರಗೂ ಬೃಹತ್ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದರು.







