ಬೆಂಗಳೂರು(www.thenewzmirror.com):ರಾಜ್ಯ ಬಿಜೆಪಿಯಲ್ಲಿ ಯಾರಿಗೇ ಅಸಮಧಾನವಿದ್ದರೂ ಅವರ ಜೊತೆ ಮಾತನಾಡಲು ನಾನು ಸಿದ್ಧನಿದ್ದೇನೆ,ಬಿಜೆಪಿ- ಜೆಡಿಎಸ್ ಮುಂದಿನ ದಿನಗಳಲ್ಲಿ ಒಟ್ಟಾಗಿ ಮುನ್ನಡೆದು ಹೇಗಾದರೂ ಮಾಡಿ ಸರಕಾರವನ್ನು ಇಳಿಸಿ ನಮ್ಮ ಸರಕಾರ ಅಧಿಕಾರಕ್ಕೆ ಬರಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಅವರು, ಅಸಮಾಧಾನಿತರನ್ನು ಕರೆದು ಮಾತನಾಡಿ ಸಮಸ್ಯೆ ಬಗೆಹರಿಸುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪ್ರಯತ್ನವನ್ನು ನಾನು ಸ್ವಾಗತಿಸುವೆ. ಅಸಮಾಧಾನದಿಂದ ಯಾರೇ ಇದ್ದರೂ ಅವರ ಜೊತೆ ಮಾತನಾಡಲು ನಾನು ಸಿದ್ಧ. ಪ್ರತಿನಿತ್ಯ ಈ ಕಚೇರಿಗೆ ಬಂದು ಮಧ್ಯಾಹ್ನದ ವರೆಗೆ ಇಲ್ಲಿ ಇರಲು ನಿರ್ಧರಿಸಿದ್ದೇನೆ. ಪ್ರತಿ ವಾರ ಒಂದೆರಡು ಜಿಲ್ಲೆಗೆ ಭೇಟಿ ನೀಡುವೆ ಎಂದು ಪ್ರಕಟಿಸಿದರು.
ಕೇಂದ್ರ ಸಚಿವ, ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಅವರ ಮಾತು ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಎಂಬ ಅರ್ಥ ನೀಡುವಂತಿದೆ. ಬಿಜೆಪಿ- ಜೆಡಿಎಸ್ ಬೇರೆಯಲ್ಲ; ನಾವು ಒಟ್ಟಾಗಿ ಮುಂದುವರೆಯುತ್ತೇವೆ. ಎಚ್.ಡಿ.ದೇವೇಗೌಡರು ಕೂಡ ಹಲವು ಬಾರಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಂಬಿಕೆ- ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮುಂದಿನ ದಿನಗಳಲ್ಲಿ ಒಟ್ಟಾಗಿ ಮುನ್ನಡೆದು ಹೇಗಾದರೂ ಮಾಡಿ ಸರಕಾರವನ್ನು ಇಳಿಸಿ ನಮ್ಮ ಸರಕಾರ ಅಧಿಕಾರಕ್ಕೆ ಬರಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಪ್ರಯತ್ನ ಮಾಡುತ್ತೇವೆ ಎಂದರು.
ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ; ಆದರೆ, ಅಲ್ಪಸಂಖ್ಯಾತರಿಗೆ ಮಿತಿ ಮೀರಿ ನೆರವು ಕೊಡುವುದು ಅಕ್ಷಮ್ಯ ಅಪರಾಧ. ಪರಿಶಿಷ್ಟ ಜಾತಿ, ವರ್ಗದ ಜನರಿಗೆ ಹೆಚ್ಚು ಅನುಕೂಲ ಮಾಡಿಕೊಡಬೇಕಾದ ಈ ಸರಕಾರವು ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸುವ ಕೆಲಸದಲ್ಲಿ ತೊಡಗಿದ್ದು, ಇದನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು. ಈಗಲಾದರೂ ಸರಕಾರ ಜಾಗೃತವಾಗಿ ಅಭಿವೃದ್ಧಿ ಕಡೆ ಗಮನ ಕೊಡಬೇಕು. ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸಿ ಕೊಡುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.
ಹಣ ಕೊಟ್ಟು ಆಶ್ರಯ ಮನೆ ಪಡೆಯಬೇಕಿದೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲರ ಆಡಿಯೋ ವೈರಲ್ ಆದ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ಬಿ.ಆರ್.ಪಾಟೀಲ್ ಹೇಳಿದ್ದು ನೂರಕ್ಕೆ ನೂರು ಸತ್ಯ. ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎಂಬುದು ಸಾಬೀತಾಗಿದೆ ಎಂದು ನುಡಿದರು. ಬಡವರು ಮನೆ ಬೇಕೆಂದರೂ ದುಡ್ಡು ಕೊಟ್ಟು ತೆಗೆದುಕೊಳ್ಳಬೇಕಾಗಿದೆ. ಸರಕಾರ ತಪ್ಪನ್ನು ಒಪ್ಪಿಕೊಂಡು ಅದನ್ನು ಸರಿಪಡಿಸಿ ಬಡವರಿಗೆ ನ್ಯಾಯ ಒದಗಿಸಿಕೊಡಲಿ ಎಂದು ಆಗ್ರಹಿಸಿದರು.
ಜನರ ಸಂಕಷ್ಟಗಳನ್ನು ಯಾರೂ ಕೇಳುವವರಿಲ್ಲ ಎಂಬಂಥ ದುಸ್ಥಿತಿ ಬಂದಿದೆ. ಕೇವಲ ಪ್ರಚಾರದಲ್ಲಿ ಇವರು ತೊಡಗಿದ್ದು, ಅಭಿವೃದ್ಧಿ ಕಡೆ ಗಮನ ಕೊಡುತ್ತಿಲ್ಲ ಎಂದು ಆಕ್ಷೇಪಿಸಿದರು.
ನೀರಾವರಿ ಯೋಜನೆಗಳು ಸಂಪೂರ್ಣ ಸ್ಥಗಿತವಾಗಿವೆ. ಕರ್ನಾಟಕದ ಯಾವುದೇ ಮೂಲೆಯಲ್ಲಾದರೂ ಒಂದು ಕಿಮೀ ರಸ್ತೆ ಆಗುತ್ತಿರುವುದನ್ನು ಈ ಸರಕಾರ ತೋರಿಸಲಿ ಎಂದು ಸವಾಲು ಹಾಕಿದರು. ಈ ಸರಕಾರ ತುಘಲಕ್ ದರ್ಬಾರ್ ಮಾಡುತ್ತಿದೆ ಎಂದು ಆರೋಪಿಸಿದರು.