ಬೆಂಗಳೂರು, (www.thenewzmirror.com) ;
ರಾಜ್ಯದಲ್ಲಿರುವ ಎಪಿಎಂಸಿಗಳ ಡಿಜಿಟಲೀಕರಣಗೊಳಿಸೋ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಪ್ರಾರಂಭಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಕೃಷಿ ಮಾರುಕಟ್ಟೆ, ಜವಳಿ ಮತ್ತು ಸಕ್ಕರೆ ಇಲಾಖೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.
ಎಫ್ಕೆಸಿಸಿಐ ನ 107 ನೇ ಸರ್ವಸದಸ್ಯರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಐದು ಸಾವಿರ ಸದಸ್ಯರನ್ನು ಹೊಂದಿರುವ ಕೈಗಾರಿಕಾ ಸಂಸ್ಥೆ ರಾಜ್ಯದ ಆರ್ಥಿಕ ಅಭಿವೃದ್ದಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದೆ. ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ರೀತಿಯಲ್ಲೇ ರಾಜ್ಯದ ಕೃಷಿ ಮಾರುಕಟ್ಟೆಯನ್ನು ಪುನರುಜ್ಜೀವನಗೊಳಿಸುವ ಅಗತ್ಯ ಕಾನೂನು ಕೂಡಾ ಜಾರಿಗೆ ತಂದಿದ್ದೇವೆ. ಈ ವಿಷಯದಲ್ಲಿ FKCCI ಬಹಳಷ್ಟು ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದನ್ನ ಸ್ಮರಿಸಿಕೊಂಡರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ಬಗ್ಗೆ ಸಭೆಗಳನ್ನು ನಡೆಸುವ ಮೂಲಕ ಅಗತ್ಯ ಸಲಹೆಗಳನ್ನು ಸಂಗ್ರಹಿಸಲಾಗಿದೆ. ಇದರಲ್ಲಿ ಮಾರುಕಟ್ಟೆಯ ಡಿಜಿಟಲೀಕರಣದ ಬೇಡಿಕೆ ಪ್ರಮುಖವಾಗಿದೆ. ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಈ ವ್ಯವಸ್ಥೆಯಲ್ಲಿ ಹಲವಾರು ಪಾಲುದಾರರು ಇದ್ದಾರೆ. ಯಾರಿಗೂ ಸಮಸ್ಯೆ ಆಗದೇ ಇರುವ ರೀತಿಯಲ್ಲಿ ಹೊಸ ವ್ಯವಸ್ಥೆಯನ್ನು ಅಳವಡಿಸುವ ಕಾರ್ಯ ಮಾಡಬೇಕಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ವಿಧಾನಸಭಾಧ್ಯಕ್ಷರಾದ ಯುಟಿ ಖಾದರ್ ಮಾತನಾಡಿ, ಬೆಂಗಳೂರು ನಗರ ವಿಶ್ವದಲ್ಲೇ ವಿಶೇಷ ಸ್ಥಾನ ಪಡೆದುಕೊಳ್ಳುವ ನಿಟ್ಟಿನಲ್ಲಿ ಎಫ್ಕೆಸಿಸಿಐ ಕೊಡುಗೆ ಅಪಾರವಾಗಿದೆ. ಯಾವುದೇ ನಗರ ತಾನೇ ತಾನಾಗಿ ಅಭಿವೃದ್ದಿ ಆಗಲು ಸಾಧ್ಯವಿಲ್ಲ. ಆರ್ಥಿಕ ಚಟುವಟಿಕೆಗಳು ನಡೆಯುವುದರಿಂದ ಮಾತ್ರ ಅಭಿವೃದ್ದಿ ಸಾಧ್ಯ. ಎಫ್ಕೆಸಿಸಿಐ ಸಂಸ್ಥೆಯ ಸದಸ್ಯರು ರಾಜ್ಯದಲ್ಲಿ ಉತ್ತಮ ಆರ್ಥಿಕ ಚಟುವಟಿಕೆಗಳು ನಡೆಯುವ ವಾತಾವರಣ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗಲು ಉತ್ತಮ ವಾತಾವರಣ ನಿರ್ಮಾಣ ಮಾಡುವಲ್ಲಿ ನಿಮ್ಮ ಪಾತ್ರ ಹಿರಿದಾಗಿದೆ. ಭವಿಷ್ಯದ ಜನಾಂಗವನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಮುಂದಿನ ಸವಾಲುಗಳಿಗೆ ಸಜ್ಜು ಮಾಡುವ ಕಾರ್ಯದಲ್ಲಿ ನಿವೆಲ್ಲರೂ ತೊಡಗಿಕೊಳ್ಳಬೇಕು ಎಂದು ಇದೇ ಸಂಧರ್ಭದಲ್ಲಿ ಕರೆ ನೀಡಿದರು.
ಎಫ್ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮಾತನಾಡಿ, ಕಳೆದ ಒಂದು ವರ್ಷದಲ್ಲಿ ಎಫ್ಕೆಸಿಸಿಐ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದಕ್ಕೆ ರಾಜ್ಯ ಸರಕಾರದಿಂದ ಹಾಗೂ ಸದಸ್ಯರುಗಳಿಂದ ಉತ್ತಮ ಸಹಕಾರ ದೊರೆತಿದೆ. ಎಪಿಎಂಸಿ ಡಿಜಟಲೀಕರಣದಿಂದ ನಮ್ಮ ಕೈಗಾರಿಕಾ ಸಮುದಾಯಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಫ್ಕೆಸಿಸಿಐ ನಿಯೋಜಿತ ಅಧ್ಯಕ್ಷ ಎಂ.ಜಿ ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷ ಉಮಾ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.