ಬೆಳಗಾವಿ(www.thenewzmirror.com):ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯ ಏಪ್ರಿಲ್ ಕಂತು ಸಧ್ಯದಲ್ಲಿ ಪಾವತಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ಗೃಹ ಲಕ್ಷ್ಮೀ ಯೋಜನೆಯ 19 ಕಂತು ಈಗಾಗಲೆ ಹಾಕಲಾಗಿದೆ. ಶೀಘ್ರವೇ 20ನೇ ಕಂತನ್ನೂ ಹಾಕುತ್ತೇವೆ. ಮಾರ್ಚ್ ತಿಂಗಳದ್ದು ಸ್ವಲ್ಪ ತಾಂತ್ರಿಕ ಸಮಸ್ಯೆಯಾಗಿದೆ, ಏಪ್ರಿಲ್ ಹಣ ಇಷ್ಟರಲ್ಲೇ ಜಮಾ ಆಗಲಿದೆ ಎಂದು ಸಚಿವರು ತಿಳಿಸಿದರು.
ಶಕ್ತಿ ತುಂಬುವ ವಿಶ್ವಾಸವಿದೆ:
ಸರಕಾರ 2 ವರ್ಷ ಪೂರೈಸಿರುವ ಸಂದರ್ಭದಲ್ಲಿ ಜನರಿಗೆ ಏನು ಹೇಳಲು ಬಯಸುತ್ತೀರಿ ಎಂದು ಕೇಳಿದಾಗ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಜನರ ಜೀವನದಲ್ಲಿ ಒಳ್ಳೆಯದಾಗಲಿ, ಜನರಿಗೆ ಅನುಕೂಲವಾಗಲಿ ಎನ್ನುವ ನೀತಿ, ಸಿದ್ದಾಂತದಿಂದ ಆಡಳಿತ ನಡೆಸುತ್ತಿದೆ. ನಾವು ಚುನಾವಣೆಗೆ ಮುನ್ನ ನೀಡಿದ ಎಲ್ಲ ವಾಗ್ದಾನಗಳನ್ನೂ ಈಡೇರಿಸಿದ್ದೇವೆ. ಹಾಗಾಗಿ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ಭರವಸೆ ಇದೆ ಎಂದರು.
ನಾವು ಅಧಿಕಾರಕ್ಕೆ ಬಂದ ತಕ್ಷಣ ಸಂವಿಧಾನ ಪೀಠ ಓದು ಜಾರಿಗೆ ತಂದಿದ್ದೇವೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವುದು ನಮ್ಮ ತತ್ವ. ಮಹಿಳೆಯರ ಸಬಲೀಕರಣ ಗುರಿ ಇಟ್ಟುಕೊಂಡು ಹಲವಾರು ಯೋಜನೆ ತಂದಿದ್ದೇವೆ. ಈ ದಿಸೆಯಲ್ಲಿ ದೃಢ ಹೆಜ್ಜೆ ಇಟ್ಟಿದ್ದೇವೆ ಎಂದು ಅವರು ಹೇಳಿದರು.
ಸಂಪುಟ ವಿಸ್ತರಣೆ, ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ, ನಮ್ಮ ಪಕ್ಷಕ್ಕೆ ಹೈಕಮಾಂಡ್ ಇದೆ. ಅವರು ಎಲ್ಲ ಶಾಸಕರ ಅಭಿಪ್ರಾಯ ಪಡೆದು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧಳಾಗಿ ನಡೆದುಕೊಳ್ಳುವವಳು, ಶಿಸ್ತು ಪಾಲಿಸುವವಳು. ಈ ಪ್ರಶ್ನೆಗಳಿಗೆ ನನ್ನಲ್ಲಿ ಉತ್ತರವಿಲ್ಲ ಎಂದು ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು.
ಸವದತ್ತಿ ಅಭಿವೃದ್ಧಿ ಯೋಜನೆ ಶ್ರೇಯಸ್ಸು ಎಚ್.ಕೆ.ಪಾಟೀಲರಿಗೇ:
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಿ, ಅನುದಾನ ತಂದಿರುವ ಕ್ರೆಡಿಟ್ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರಿಗೆ ಸಲ್ಲಬೇಕೇ ವಿನಃ ಸಂಸದ ಜಗದೀಶ ಶೆಟ್ಟರ್ ಗೆ ಅಲ್ಲ,ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದವರು. ಸಾಮಾನ್ಯ ಜ್ಞಾನವಾದರೂ ಬೇಕಲ್ಲ, ಅವರು ಸಂಸದರಾದ ತಕ್ಷಣ ಪತ್ರ ಕೊಟ್ಟು ಬಿಟ್ಟರೆ ನೂರಾರು ಕೋಟಿ ರೂ. ಕೊಟ್ಟು ಬಿಡುತ್ತಾರಾ? ಮುಖ್ಯಮಂತ್ರಿಗಳಾಗಿದ್ದವರಿಗೆ ಈ ಕುರಿತು ಜ್ಞಾನವಿರಬೇಕಲ್ಲ. ಬಾಯಿ ಇದೆ ಎಂದು ಏನೇ ಮಾತನಾಡಿದರೂ ನಡೆಯುತ್ತಾ? ಅವರು ಸಂಸದರಿದ್ದಾರೆ, ತಮ್ಮನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಕೇಳಿದರೆ ಒಪ್ಪೋಣ, ಅದು ಬಿಟ್ಟು ನಾನು ಅನುದಾನ ತಂದಿದ್ದೇನೆ ಎಂದರೆ ಹೇಗೆ? ಅವರಿಗೆ ತಾಕತ್ತಿದ್ದರೆ ಜಿಲ್ಲೆಯಲ್ಲಿ ಸಾಕಷ್ಟು ದೇವಸ್ಥಾನಗಳಿವೆ, ಅನುದಾನ ತಂದು ಅಭಿವೃದ್ಧಿ ಮಾಡಿ ತೋರಿಸಲಿ ಎಂದು ಸವಾಲು ಹಾಕಿದರು.
ಎಚ್.ಕೆ.ಪಾಟೀಲರ ಮನೆ ದೇವರು ಸವದತ್ತಿ. ಅವರು ಸವದತ್ತಿ ಅಭಿವೃದ್ಧಿಗೆ ಯೋಜನ ರೂಪಿಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಾಕಷ್ಟು ಪ್ರಯತ್ನಿಸಿದ್ದಾರೆ. ಅವರ ಪ್ರಯತ್ನದಿಂದ ಅನುದಾನ ಬಂದಿದೆ. ಅದರ ಸಂಪೂರ್ಣ ಶ್ರೇಯಸ್ಸು ಎಚ್.ಕೆ.ಪಾಟೀಲ ಅವರಿಗೆ ಸಲ್ಲಬೇಕೇ ವಿನಃ ಜಗದೀಶ್ ಶೆಟ್ಟರ್ ಗೆ ಅಲ್ಲ ಎಂದು ಹೆಬ್ಬಾಳಕರ್ ಸ್ಪಷ್ಟಪಡಿಸಿದರು.
ಮೃಣಾಲ ಶುಗರ್ಸ್ ಗೆ ಸಂಬಂಧವಿಲ್ಲ:
ಹಿಡಕಲ್ ಜಲಾಶಯದಿಂದ ಧಾರವಾಡದ ಕೈಗಾರಿಕೆ ಪ್ರದೇಶಕ್ಕೆ ನೀರು ಒಯ್ಯುವ ಯೋಜನೆಗೂ ತಮ್ಮ ಮೃಣಾಲ ಶುಗರ್ಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು.
ಬೆಳಗಾವಿಗೆ ಏನೇ ಕೆಟ್ಟದಾದರೂ ನನ್ನ ತಲೆಗೆ ಕಟ್ಟುವ ಪ್ರಯತ್ನ ನಡೆಯುತ್ತಿದೆ. ಹಿಡಕಲ್ ಜಲಾಶಯದಿಂದ ನೀರು ಯಾರು ಒಯ್ಯುತ್ತಿದ್ದಾರೆ? ಏಕೆ ಒಯ್ಯುತ್ತಿದ್ದಾರೆ? ನನಗೆ ಗೊತ್ತಿಲ್ಲ. ಇದಕ್ಕೆ ನಮ್ಮ ಹೆಸರನ್ನು ತಳುಕು ಹಾಕುವುದನ್ನು ಕೇಳಿ ನನಗೆ ಆಶ್ಚರ್ಯ ಮತ್ತು ಅನುಮಾನ ಹುಟ್ಟಿದೆ. ನಮ್ಮ ಶುಗರ್ ಫ್ಯಾಕ್ಟರಿಗೆ ಈ ನೀರು ಅಗತ್ವವೂ ಇಲ್ಲ, ಅದಕ್ಕೆ ಸಂಬಂಧವೂ ಇಲ್ಲ. ನಮಗೆ ಹತ್ತಿರದಲ್ಲಿ ಹಳ್ಳವಿದೆ, ಬೇಕಾದಷ್ಟು ಕೊಳವೆ ಬಾವಿಗಳನ್ನೂ ತೋಡಿಸಿದ್ದೇವೆ. ಅಲ್ಲಿ ಸಾಕಷ್ಟು ನೀರು ಬಂದಿದೆ. ನಮಗೆ ಬೇರೆ ನೀರು ಬೇಕಾಗಿಲ್ಲ. ಈ ಯೋಜನೆ ಯಾವಾಗ ಜಾರಿಗೆ ಬಂದಿದೆ, ಯಾರು ರೂಪಿಸಿದ್ದಾರೆ ಎನ್ನುವುೂ ನನಗೆ ಗೊತ್ತಿಲ್ಲ. ನನಗಂತೂ ಸಂಬಂಧವೇ ಇಲ್ಲ ಎಂದು ಅವರು ವಿವರಿಸಿದರು.
ಬೆಳಗಾವಿ ಜನರ ಭಾವನೆಗಳಿಗೆ ವಿರುದ್ಧವಾಗಿ ನಾನು ಯಾವತ್ತೂ ನಡೆದುಕೊಳ್ಳುವುದಿಲ್ಲ. ಹಿಡಕಲ್ ಜಲಾಶಯದ ನೀರನ್ನು ಧಾರವಾಡಕ್ಕೆ ಒಯ್ಯುವ ಯೋಜನೆ ಸಚಿವಸಂಪುಟದ ಮುಂದೆ ಬಂದೂ ಇಲ್ಲ. ಇದು ಯಾವ ಕಾಲದಲ್ಲಿ ಮಂಜೂರಾಗಿದೆ ಎನ್ನುವುದೂ ಗೊತ್ತಿಲ್ಲ. ನಾವಂತೂ ಒಪ್ಪಿಗೆ ಕೊಟ್ಟಿಲ್ಲ. ಈ ಬಗ್ಗೆ ಈಗಾಗಲೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಯನ್ನೂ ಕೊಟ್ಟಿದ್ದಾರೆ. ನಾನೂ ಅವರೊಂದಿಗೆ ಚರ್ಚಿಸಿ, ಸೂಕ್ತವಾಗಿ ಸ್ಪಂದಿಸುತ್ತೇನೆ ಎಂದು ಹೆಬ್ಬಾಳಕರ್ ತಿಳಿಸಿದರು.
ಕಮಲ್ ಹಾಸನ್ ಕ್ಷಮೆ ಕೇಳಲಿ:
ಕನ್ನಡದ ಕುರಿತು ತಪ್ಪು ಹೇಳಿಕೆ ನೀಡಿರುವ ಕಮಲ್ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆ ಕೇಳಿದರೆ ಮುಗಿದು ಹೊಗುತ್ತದೆ. ಕನ್ನಡಿಗರು ಹೃದಯವಂತರು, ಕ್ಷಮಿಸುತ್ತಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಹಿರಿಯರಾದ ಅವರು ಕ್ಷಮೆ ಕೇಳಿ ವಿವಾದವನ್ನು ಮುಗಿಸಬೇಕು. ಅನಗತ್ಯವಾಗಿ ಮುಂದುವರಿಸಬಾರದು ಎಂದು ಸಚಿವರು ಹೇಳಿದರು.
ಪರಿಸರವಾದಿಗಳು ಸಹಕಾರ ಕೊಡಲಿ:
ಮಹದಾಯಿ ಯೋಜನೆ ವಿರುದ್ಧ ಪರಿಸರ ವಾದಿಗಳು ಈಗ ಹೋರಾಟ ನಡೆಸುತ್ತಿರುವ ಕುರಿತು ಪ್ರಶ್ನಿಸಿದಾಗ, ಬಹಳ ವರ್ಷಗಳ ಹೋರಾಟದ ಫಲವಾಗಿ ಮಹದಾಯಿ ಯೋಜನೆ ಈಗ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಇದು ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಇದಕ್ಕೆ ಪರಿಸರವಾದಿಗಳು ಅಡ್ಡಿಪಡಿಸಬಾರದು ಎಂದು ವಿನಂತಿಸುತ್ತೇನೆ. ಜನರ ಹಗೂ ಜಾನುವಾರುಗಳ ಜೀವದ ಪ್ರಶ್ನೆ ಇದರಲ್ಲಿದೆ. ದಯಮಾಡಿ ಅಡ್ಡಿಪಡಿಸಬೇಡಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.ಪರಿಸರವಾದಿಗಳ ಹೋರಾಟ ಗೋವಾ ಪ್ರಾಯೋಜಿತ ಎನ್ನುವ ಆರೋಪವಿದೆಯಲ್ಲ ಎನ್ನುವ ಪ್ರಶ್ನೆಗೆ, ಇದು ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಷಯ ಮಾತನಾಡುವುದಿಲ್ಲ ಎಂದು ತಿಳಿಸಿದರು.