ಬೆಂಗಳೂರು(www.thenewzmirror.com):ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ವಿಧಾನಸೌಧದಲ್ಲಿ ನಡೆದ ಜಿಲ್ಲಾಡಳಿತಗಳ ಜೊತೆಗಿನ ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು.ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.
ರೈತರ ಆತ್ಮಹತ್ಯೆ: ಪರಿಹಾರ ವಿಳಂಬಕ್ಕೆ ಸಿಎಂ ಗರಂ
ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿಗಳು ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು.
ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಆದಷ್ಟು ಬೇಗ ಬಗೆಹರಿಸಿ ಪರಿಹಾರ ಒದಗಿಸಿ ಎನ್ನುವ ಸೂಚನೆ ನೀಡಿದರು.
ಭೂಕುಸಿತ: ತಕ್ಷಣ ತೆರಳುವಂತೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮತ್ತು DC ಅವರಿಗೆ ಸೂಚಿಸಿದ ಸಿಎಂ:
ರಾತ್ರಿ ಬಿದ್ದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿಗಳು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ದ.ಕ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅನರ್ಹ ಪಡಿತರ ಚೀಟಿಗಳು ಇನ್ನೂ ಹೇಗೆ ಉಳಿದುಕೊಂಡಿವೆ:
ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಸುಮಾರು ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಪ್ರಶ್ನಿಸಿದರು.
ಬಡವರ ಇಂದಿರಾ ಕ್ಯಾಂಟೀನ್ ಕಾರ್ಯ ಪೂರ್ಣಗೊಳಿಸಿ :
ನಮ್ಮ ಸರ್ಕಾರ ಹೊಸದಾಗಿ ಘೋಷಣೆ ಮಾಡಿರುವ ಎಲ್ಲಾ ಇಂದಿರಾ ಕ್ಯಾಂಟೀನ್ಗಳು ಕಾರ್ಯಾರಂಭ ಮಾಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಂದಿರಾ ಕ್ಯಾಂಟೀನ್ಗಳಿಗೆ ಇನ್ನೂ 5ಕಡೆ ಸ್ಥಳ ಗುರುತಿಸಬೇಕಾಗಿದೆ. ತಕ್ಷಣ ನಿವೇಶನ ಗುರುತಿಸಬೇಕು. ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್ಗಳಲ್ಲಿ ಮಾತ್ರ ಪ್ರಾರಂಭವಾಗಿದೆ. ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.
ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ: ಸಿಎಂ ಸೂಚನೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು. ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು. ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.
ಸರಿಯಾಗಿ 30 ನಿಮಿಷಕ್ಕೆ ಸಿಎಂ ಖಡಕ್ ಎಂಟ್ರಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು
DC ಮತ್ತು CEO ಗಳ ಸಭೆಗೆ ಮಧ್ಯಾಹ್ನ ಊಟದ ಬಿಡುವು 30 ನಿಮಿಷ ನೀಡಲಾಗಿತ್ತು. ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಊಟಕ್ಕೆಂದು ಮನೆಗೆ ತೆರಳಿದರು.ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು.ಆದರೆ, ಮುಖ್ಯಮಂತ್ರಿಗಳು ಊಟ ಮುಗಿಸಿ ಸರಿಯಾಗಿ 30 ನಿಮಿಷಕ್ಕೆ ಸಮ್ಮೇಳನ ಸಭಾಂಗಣಕ್ಕೆ ಖಡಕ್ ಎಂಟ್ರಿ ಕೊಟ್ಟರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು, “ಸರ್ ಅಧಿಕಾರಿಗಳು ಇನ್ನೂ ಊಟಕ್ಕೆ ಹೋಗಿದ್ದಾರೆ ಸರ್, ಬರ್ತಾರೆ ಎಂದು ಸಮಾಧಾನಗೊಳಿಸಿದರು.
ಮುಖ್ಯಮಂತ್ರಿಗಳು ಸರಿಯಾದ ಸಮಯಕ್ಕೆ ಬಂದ ಸುದ್ದಿ ಕೇಳಿ ಬ್ಯಾಂಕ್ವೆಂಟ್ ಹಾಲ್ ನಲ್ಲಿದ್ದ ಅಧಿಕಾರಿಗಳು, ಸಚಿವರು ತಡಬಡಾಯಿಸಿ ದೌಡಾಯಿಸಿದರು.ಊಟಕ್ಕೆ ಬಿಡುವು ಕೊಡುವಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 45 ನಿಮಿಷ ಬಿಡುವು ಕೊಡೋಣ ಎಂದಿದ್ದರು. ಮುಖ್ಯಮಂತ್ರಿಗಳು ಅರ್ಧ ಗಂಟೆ ಸಾಕು ಎಂದು ಹೇಳಿದ್ದರು. ತಮ್ಮ ಸೂಚನೆಯಂತೆ ಮುಖ್ಯಮಂತ್ರಿಗಳು ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿತು.