ಕಾವೇರಿ ಆರತಿಗೆ ವಿರೋಧ ಮಾಡಬೇಡಿ, ಸಹಕಾರ ನೀಡಿ: ಡಿಕೆ ಶಿವಕುಮಾರ್

RELATED POSTS

ಮಂಡ್ಯ(www.thenewzmirror.com):ನೀರಿಗೆ ಜಾತಿ, ಧರ್ಮವಿಲ್ಲ. ನೀರನ್ನು ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಕಾವೇರಿ ಆರತಿಯನ್ನು ವಿರೋಧ ಮಾಡಲೇಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಸಹಕಾರ ‌ನೀಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿನಮ್ರತೆಯಿಂದ ಕೇಳಿಕೊಂಡಿದ್ದಾರೆ.

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಾನು ಭಕ್ತಿ, ವಿನಮ್ರತೆಯಿಂದ ಕಾವೇರಿ ಆರತಿ ವಿರೋಧ ಮಾಡುವವರಲ್ಲಿ ಅಡ್ಡಿ ಪಡಿಸಬೇಡಿ. ವಿರೋಧ ಮಾಡಲೇಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಸಹಕಾರ ‌ನೀಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ನೀರಿಗೆ ಜಾತಿ, ಧರ್ಮವಿಲ್ಲ. ನೀರನ್ನು ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ. ಈ ರಾಜ್ಯದ ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಅನೇಕ ಅನುದಾನ ನೀಡುತ್ತಿದೆ. 19,700 ಕೋಟಿ ಹಣವನ್ನು ರೈತರಿಗೆ ನೀಡುವ ಉಚಿತ ವಿದ್ಯುಚ್ಛಕ್ತಿಗಾಗಿ ನಮ್ಮ ಸರ್ಕಾರ ನೀಡುತ್ತಿದೆ” ಎಂದರು.

“ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ? ಯಾರದ್ದಾದರೂ ಅನುಮತಿ ಬೇಕೆ? ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ” ಎಂದು ಹೇಳಿದರು.

“ಭಕ್ತ ಹಾಗೂ ಭಗವಂತನಿಗೆ ವ್ಯಾವಹಾರ ನಡೆಯುವ ಸ್ಥಳ ದೇವಸ್ಥಾನ. ಇಲ್ಲಿ ಜನ ಕುಳಿತುಕೊಳ್ಳಲು ಸ್ಥಳ ಮಾಡಲಾಗುತ್ತಿದೆ. ನೀವು ಏಕೆ ಮನೆಯಲ್ಲಿ ಪ್ರತಿದಿನ ದೇವರ ಪೂಜೆ ಮಾಡುತ್ತೀರಿ. ದೇವರು ಇಲ್ಲದಿದ್ದರೂ ಸೂರ್ಯನಿಗೆ ಏಕೆ ನಮಸ್ಕಾರ ಮಾಡುತ್ತೀರಿ. ನನ್ನ ಮಾತುಗಳು ನೇರ, ದಿಟ್ಟವಾಗಿ ಇರಬಹುದು ಯಾರೂ ಸಹ ಅನ್ಯತಾ ಭಾವಿಸಬಾರದು” ಎಂದು ಹೇಳಿದರು.

ಅತ್ಯುತ್ತಮ ಪ್ರವಾಸಿ ಕೇಂದ್ರ ನಮ್ಮ ಗುರಿ:

“ಬೃಂದಾವನ ಉದ್ಯಾನವನ್ನು ಅತ್ಯಂತ ಹೆಚ್ಚು ಆಕರ್ಷಣೀಯಗೊಳಿಸುವುದು ನಮ್ಮ ಉದ್ದೇಶ. ಮೈಸೂರು ದಸರಾ ರೀತಿ ಅತ್ಯುತ್ತಮ ದೀಪಾಲಂಕಾರ ಮಾಡಲಾಗಿದೆ. ಅತ್ಯುತ್ತಮ ಕಾರಂಜಿಗಳನ್ನು ತರಿಸಲಾಗಿದೆ. ವಿದೇಶಗಳಿಂದ ಅಲಂಕಾರಿಕ‌ ಸಸ್ಯಗಳನ್ನು ತರಿಸಲಾಗಿದೆ.‌ ನಮ್ಮ ಮುಖ್ಯಮಂತ್ರಿಗಳು ಇದನ್ನು ಅತ್ಯುತ್ತಮ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಸಂಕಲ್ಪ ಮಾಡಿದ್ದಾರೆ. ಇದಕ್ಕೆ ಖಾಸಗಿಯವರು ಬಂಡವಾಳ ಹೂಡಬಹುದು ಎಂದು ಆಹ್ವಾನ ಮಾಡಿದ್ದೇವೆ” ಎಂದು ಹೇಳಿದರು.

“ರಾಜ್ಯದ ಅಣೆಕಟ್ಟುಗಳ ಗೇಟ್ ಗಳನ್ನು ದುರಸ್ತಿಗೊಳಿಸಲು ಈಗಾಗಲೇ ತಾಂತ್ರಿಕ ಸಮಿತಿಯನ್ನು ರಚನೆ ಮಾಡಿದ್ದೇವೆ. ಆ ಸಮಿತಿಯಿಂದ ವರದಿ ತೆಗೆದುಕೊಂಡು ಹಂತ, ಹಂತವಾಗಿ ರಾಜ್ಯದ ಅಣೆಕಟ್ಟುಗಳ ಗೇಟ್ ದುರಸ್ತಿಯನ್ನು ಮಾಡಬೇಕು ಎಂದು ಮುಂದಾಗಿದ್ದೇವೆ. ಕೃಷ್ಣ ಟ್ರಿಬ್ಯೂನಲ್ ಅವಾರ್ಡ್ ಗೆ ಒಮ್ಮೆ ಮಹಾರಾಷ್ಟ್ರದವರು ಅಡ್ಡಗಾಲು ಹಾಕಿದ್ದರು. ಈಗ ಆಂಧ್ರ ಪ್ರದೇಶದವರು ಇದನ್ನು ಮುಂದೂಡಿಸಿದ್ದಾರೆ” ಎಂದರು. 

“ಬಜೆಟ್ ಮಂಡಿಸಿ ಒಂದು ತಿಂಗಳಾಗಿದೆ ತಾಳ್ಮೆಯಿಂದ ಇದ್ದರೆ ಅನುದಾನ ಬಂದೇ ಬರುತ್ತದೆ. ನಾವು ಕೊಟ್ಟ ಮಾತನ್ನು ತಪ್ಪುವವರಲ್ಲ. ಆರ್ಥಿಕ ಇಲಾಖೆಯವರು ಆರ್ಥಿಕ ಶಿಸ್ತಿಗಾಗಿ ಹಂತ, ಹಂತವಾಗಿ ಹಣ ಬಿಡುಗಡೆ ಮಾಡುತ್ತಾರೆ. ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಕಾಲದಲ್ಲಿ ಬಜೆಟ್ ಗಿಂತ ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ. ಅದಕ್ಕಾಗಿ ಗುತ್ತಿಗೆದಾರರು ಸ್ವಲ್ಪ ತಾಳ್ಮೆಯಿಂದ ವರ್ತನೆ ಮಾಡಬೇಕು. ನಮ್ಮನ್ನು ಟೀಕೆ ಮಾಡುವವರಿಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕು. ಮಂಡ್ಯ, ಮೈಸೂರು, ಬೆಂಗಳೂರು ಭಾಗಕ್ಕೆ ಅವರ ಕೊಡುಗೆ ಏನು ಎಂದು ಕೇಳಬೇಕು” ಎಂದು ಹೇಳಿದರು.

“ತುಂಗಾಭದ್ರಾ ಅಣೆಕಟ್ಟಿನ ಗೇಟ್ ಒಡೆದು ಹೋದಾಗ ಪ್ರತಿ ಪಕ್ಷಗಳು ಇಲ್ಲ ಸಲ್ಲದ ಟೀಕೆ ಮಾಡಿದರು. ಇಡೀ ಡ್ಯಾಂ ಒಡೆದು ಹೋಗುತ್ತದೆ ಎಂದು ಆರೋಪ ಮಾಡಿದರು. ನಾವು ತಕ್ಷಣ ತೀರ್ಮಾನ ತೆಗೆದುಕೊಂಡು ಆ ಗೇಟ್ ಅನ್ನು ದುರಸ್ತಿಗೊಳಿಸಿ ರೈತರ ಎರಡನೇ ಬೆಳೆಗೂ ನೀರು ನೀಡಿದ ಇತಿಹಾಸ ಈ ಕಾಂಗ್ರೆಸ್ ‌ಸರ್ಕಾರಕ್ಕಿದೆ. ಆ ಗೇಟ್ ದುರಸ್ತಿಗೆ ದುಡಿದ ಪ್ರತಿಯೊಬ್ಬ ಕಾರ್ಮಿಕನಿಗೂ ನಾನು ಹಾಗೂ ಸಿದ್ದರಾಮಯ್ಯ ಅವರು ಸನ್ಮಾನಿಸಿದೆವು. ಮುಖ್ಯ ಎಂಜಿನಿಯರ್‌ ಒಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿದೆವು” ಎಂದು ಹೇಳಿದರು.

ಕವನ ವಾಚಿಸಿದ ಡಿಸಿಎಂ:

“ಕಾವೇರಿ ತುಂಬಿದ್ದಾಳೆ, ರೈತರು ನಲಿದಿದ್ದಾರೆ. ಕಾವೇರಿ ಒಲಿದಿದ್ದಾಳೆ ಬರ ಓಡಿಸಿದ್ದಾಳೆ. ನಮ್ಮೆಲ್ಲರ ಪ್ರಾರ್ಥನೆಗೆ, ನಿಮ್ಮೆಲ್ಲರ ಆರತಿಗೆ ಕಾವೇರಿ ತುಂಬಿ ಹರಿಯುತ್ತಿದ್ದಾಳೆ. ಕಾವೇರಿ ತುಂಬಿದರೆ ಶಾಂತಿ. ಕಾವೇರಿ ಹರಿದರೆ ಸಂತೃಪ್ತಿ” ಎಂದು ಕವನವನ್ನು ಡಿಸಿಎಂ ಶಿವಕುಮಾರ್ ಅವರು ವಾಚನ ಮಾಡಿದರು.

“ಮೈಸೂರು ರಾಜಮಾತೆ ತಮ್ಮ ಒಡವೆಗಳನ್ನು ಅಡವಿಟ್ಟು ಈ ಅಣೆಕಟ್ಟು ನಿರ್ಮಾಣಕ್ಕೆ ಮುನ್ನುಡಿ ಬರೆದರು. ಈ ಕಾರಣಕ್ಕೆ ಕಬ್ಬಿನ ಸಿಹಿ ಹಂಚಲಾಗುತ್ತಿದೆ, ಇಡೀ ಬೆಂಗಳೂರಿಗೆ, ತಮಿಳುನಾಡಿಗೆ ‌ನೀರು ನೀಡಲಾಗುತ್ತಿದೆ” ಎಂದು ಹೇಳಿದರು.

“ಕಾವೇರಿ ನಮ್ಮೆಲ್ಲರ ಜೀವಧಾರೆ, ಕೆಆರ್ ಎಸ್ ತುಂಬಿದರೆ ಸಂತೃಪ್ತಿಯ ಧಾರೆ, ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ. ಹಿಮಾಲಯದಲ್ಲಿ ಹುಟ್ಟುವ ಗಂಗಾ ನದಿಯಷ್ಟೇ ನಮ್ಮ ರಾಜ್ಯದಲ್ಲಿ ಹುಟ್ಟುವ ಕಾವೇರಿ ನದಿ ಪವಿತ್ರವಾದುದು. ಹುಟ್ಟು ಸಾವು, ಪ್ರಕೃತಿ, ಭೂಮಿ ಯಾವುದು ನಮ್ಮ ಕೈಯಲ್ಲಿ ಇಲ್ಲ. ಎಲ್ಲವೂ ಭಗವಂತನ ಕೈಯಲ್ಲಿದೆ. ಇನ್ನೊಬ್ಬರ ಜೀವನದಲ್ಲಿ ಎಷ್ಟು ಬದಲಾವಣೆ ತರುತ್ತೇವೆ, ಸಂತೋಷ ಉಂಟು ಮಾಡುತ್ತೇವೆ ಎನ್ನುವುದರಲ್ಲಿ ನಮ್ಮ ಬದುಕಿನ ಸಾರ್ಥಕತೆ ಅಡಗಿದೆ” ಎಂದು ತಿಳಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist