ಬೆಂಗಳೂರು(www.thenewzmirror.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಈಶ್ವರ ಖಂಡ್ರೆ ಅವರು, ಹಳ್ಳಿಗಳ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದೇ ತಮ್ಮ ಮೊದಲ ಆದ್ಯತೆ ಎಂದು ಪ್ರಕಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಅವರು, ಗ್ರಾಮೀಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ನಿರ್ಧಾರಗಳನ್ನು ಹಂಚಿಕೊಂಡಿದ್ದಾರೆ.
ಮುಂದಿನ 25 ವರ್ಷಗಳ ದೀರ್ಘಾವಧಿ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ಭೂಮೇಲ್ಮೈ ಜಲಮೂಲಗಳನ್ನು ಬಳಸಿಕೊಂಡು ಗ್ರಾಮೀಣ ಭಾಗದ ಪ್ರತಿ ಮನೆಗೂ ಕುಡಿಯುವ ನೀರು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ. “ಭಾರತದ ಆತ್ಮ ಹಳ್ಳಿಗಳಲ್ಲಿದೆ” ಎಂಬ ಮಹಾತ್ಮ ಗಾಂಧೀಜಿಯವರ ಮಾತು ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧೀಜಿಯವರ ಅಧಿಕಾರ ವಿಕೇಂದ್ರೀಕರಣದ ದೂರದೃಷ್ಟಿಯ ಚಿಂತನೆಗಳನ್ನು ಸಾಕಾರಗೊಳಿಸುವುದೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕುಡಿಯುವ ನೀರಿನ ಜೊತೆಗೆ ಗ್ರಾಮೀಣ ಭಾಗದ ಸ್ವಚ್ಛತೆ, ಉತ್ತಮ ಗುಣಮಟ್ಟದ ಶಾಶ್ವತ ಆಸ್ತಿಗಳ ಸೃಜನೆ, ಕೆರೆ ಹಾಗೂ ನೈಸರ್ಗಿಕ ಜಲಮೂಲಗಳ ಪುನಶ್ಚೇತನ ಮತ್ತು ಸಂರಕ್ಷಣೆಗೆ ವಿಶೇಷ ಒತ್ತು ನೀಡಲಾಗುವುದು. ಈ ಹಿಂದೆ ಗ್ರಾಮೀಣಾಭಿವೃದ್ಧಿ ಇಲಾಖೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಾರಿಗೆ ತಂದಿದ್ದ ಜನಪರ ಯೋಜನೆಗಳು ಹಾಗೂ ಉತ್ತಮ ಕಾರ್ಯಕ್ರಮಗಳನ್ನು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಸಿಕೊಂಡು ಹೋಗಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.






