ಬೆಂಗಳೂರು, (www.thenewsmirror.com) ;
ರಾಜ್ಯದಲ್ಲಿ ಸಾಕಷ್ಟು ಸಂಚಲನ ಹುಟ್ಟಿಸಿದ್ದ ಹಾಗೂ ರಾಜಕೀಯವಾಗಿ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಮುಡಾ ಹಗರಣದಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದು, ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಸೇರಬೇಕಿದ್ದು, ಕಾನೂನಾತ್ಮಕವಾಗಿ ಎದುರಿಸುವ ನಿಟ್ಟಿನಲ್ಲಿ ಸಮಾಲೋಚನೆ ಆರಂಭಿಸಿದ್ದಾರೆ
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮೂಲಗಳಿಂದ ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಚರ್ಚಿಸಿದ್ದರು. ಮುಂದಿನ ಕಾನೂನು ಹೋರಾಟದ ಕುರಿತು ಪೊನ್ನಣ್ಣ ಜೊತೆ ಮಾತನಾಡಿದ್ದರು. ಇದೀಗ ಕಾನೂನು ಹೋರಾಟಕ್ಕೆ ಅವರು ಮುಂದಾಗಿದ್ದಾರೆ.
ಒಂದು ಕಡೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೆ ಮತ್ತೊಂದು ಕಡೆ ರಾಜ್ಯಪಾಲರ ಕಚೇರಿಯಿಂದ ಅಬ್ರಹಾಂಗೆ ಕರೆ ಹೋಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತೇನೆ, ನಾನು ಈಗ ಮಡಿಕೇರಿಯಲ್ಲಿದ್ದು ಬೆಂಗಳೂರಿಗೆ ಮಧ್ಯಾಹ್ನ ಬರುತ್ತೇನೆ ಎಂದು ಅಬ್ರಹಾಂ ಹೇಳಿದ್ದಾರೆ.
ಏನಿದು ಮೂಡ ಹಗರಣ..?
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್ಗಳನ್ನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಇದರ ಜತೆಗೆ ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಇದರ ಆಧಾರದ ಮೇಲೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, FIR ದಾಖಲಾಗುವ ಸಾಧ್ಯತೆಯಿದೆ.