ಬೆಂಗಳೂರು(www.thenewzmirror.com): ಭಾರತ ಇಂದು ರಕ್ಷಣಾ ವಲಯದಲ್ಲಿ ಸಶಕ್ತ, ಬಲಿಷ್ಠ ದೇಶವಾಗಿ ಹೊರಹೊಮ್ಮಿದೆ. ಅದಕ್ಕೆ ಮೋದಿ ಅವರ ದೂರದೃಷ್ಟಿ ಹಾಗೂ ನಮ್ಮ ವಿಜ್ಞಾನಿಗಳು, ತಂತ್ರಜ್ಞರು ಕಾರಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರು ರಸ್ತೆಯಲ್ಲಿ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಯ 64ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಅನೇಕ ವಿಷಯಗಳಲ್ಲಿ ನಾವು ವಿದೇಶಗಳನ್ನು ಅವಲಂಬಿಸಬೇಕಾಗಿತ್ತು. ಈಗ ಆ ಪರಿಸ್ಥಿತಿ ಬದಲಾಗಿದ್ದು, ಪ್ರತಿಯೊಂದು ಸ್ವದೇಶಿಯವಾಗಿಯೇ ಉತ್ಪಾದನೆ ಮಾಡಲಾಗುತ್ತಿದೆ.ರಕ್ಷಣಾ ಪಡೆಗಳಿಗೆ ಅಗತ್ಯವಾದ ಅನೇಕ ಶಸ್ತ್ರಾಸ್ತ್ರಗಳನ್ನು ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ ಕಾರ್ಯಕ್ರಮಗಳ ಮೂಲಕ ತಯಾರು ಮಾಡಲಾಗುತ್ತಿದೆ. ಭಾರತ ಇಂದು ರಕ್ಷಣಾ ವಲಯದಲ್ಲಿ ಸಶಕ್ತ, ಬಲಿಷ್ಠ ದೇಶವಾಗಿ ಹೊರಹೊಮ್ಮಿದೆ. ಅದಕ್ಕೆ ಮೋದಿ ಅವರ ದೂರದೃಷ್ಟಿ ಹಾಗೂ ನಮ್ಮ ವಿಜ್ಞಾನಿಗಳು, ತಂತ್ರಜ್ಞರು ಕಾರಣ ಎಂದು ಸಚಿವರು ಹೇಳಿದರು.
ಪ್ರತಿಭಾವಂತ ಯುವಕರು, ಯುವತಿಯರ ದುಡಿಮೆಯ ಫಲದಿಂದ ನಮ್ಮ ದೇಶದಲ್ಲಿ ತಯಾರು ಮಾಡಿರುವ ಯುದ್ಧದ ಉಪಕರಣಗಳು ಜಗತ್ತಿನ ಬೇರೆ ಯಾವ ದೇಶಕ್ಕೂ ಕಡಿಮೆ ಇಲ್ಲ. ಎಲ್ಲರಿಗೂ ಸರಿಸಾಟಿ ಆಗುವಂತಹ ಅಸ್ತ್ರಗಳು ನಮ್ಮ ಬತ್ತಳಿಕೆಯಲ್ಲಿ ಇವೆ ಎಂದರೆ ಅದಕ್ಕೆ ನಿಮ್ಮೆಲ್ಲರ ಶ್ರಮವೇ ಕಾರಣ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ಶಸ್ತ್ರಾಸ್ತ್ರಗಳ ಶಕ್ತಿ ಏನು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಅಪಪರೇಶನ್ ಸಿಂಧೂರ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಸಚಿವರು ಹೇಳಿದರು.
ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ದೊಡ್ಡ ಮಟ್ಟದಲ್ಲಿ ಸಂಶೋಧನೆ ನಡೆಸುತ್ತಿದೆ. ಸೆಮಿಕಂಡಕ್ಟರ್ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಬೆಂಗಳೂರು ನೆಚ್ಚಿನ ತಾಣವಾಗಿದೆ. ಸಮರ್ಪಕ ಮಾನವ ಸಂಪನ್ಮೂಲ ಹಾಗೂ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆ ಇರುವುದರಿಂದ ಈ ಕ್ಷೇತ್ರಗಳಿಗೆ ಬೆಂಗಳೂರಿನಲ್ಲಿ ಭಾರೀ ಅವಕಾಶಗಳು ಇವೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.
ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆ ಕೇಂದ್ರದ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸಂಸ್ಥೆ ಆಗಿದೆ. ರಕ್ಷಣೆ, ಬಾಹ್ಯಾಕಾಶ ಸೇರಿದಂತೆ ವಿವಿಧ ಕೈಗಾರಿಕೆ ಅಗತ್ಯಗಳಿಗೆ ತಕ್ಕಂತೆ ಇಲ್ಲಿ ಉತ್ಪಾದನೆ ನಡೆಯುತ್ತಿದೆ. ಅನೇಕ ಯುವ ವಿಜ್ಞಾನಿಗಳು, ತಂತ್ರಜ್ಞರು ಇಲ್ಲಿ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದು ಸಚಿವರು ಹೇಳಿದರು.
ಸಮಾರಂಭದ ನಂತರ ಕೇಂದ್ರ ಸಚಿವರು ‘ ಪ್ರಮಾಣೀಕೃತ ಉಲ್ಲೇಖ ಧಾತು ಸೌಲಭ್ಯ’ ಕೇಂದ್ರವನ್ನು ಉದ್ಘಾಟಿಸಿದರು. ಇದಾದ ಮೇಲೆ ಏರೋಸ್ಪೇಸ್ ಪ್ರಯೋಗಾಲಯ, ಸಂವೇದಕ ತಂತ್ರಜ್ಞಾನ ಅಭಿವೃದ್ಧಿ ಕೇಂದ್ರ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.