ಬೆಂಗಳೂರು(www.thenewzmirror.com):ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂಬ ಸೂಚನೆಗಳನ್ನು ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಕಳೆದ ಒಂದು ವರ್ಷದ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯ ಮೌಲ್ಯಮಾಪನ, ಇಲಾಖೆಯ ಬೇಡಿಕೆಗಳು, ಸರ್ಕಾರದ ನೆರವಿನ ಸಭೆಯಲ್ಲಿ ಚರ್ಚೆ ನಡೆದಿದೆ. ಅದೇ ರೀತಿ ರಾಜ್ಯದಲ್ಲಿ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲು ಹಲವಾರು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಜನರ ಕಷ್ಟ ಸುಖ ಕೇಳುವುದು ಪೊಲೀಸ್ ಇಲಾಖೆಯ ಕರ್ತವ್ಯವಾಗಿದೆ. ಸಾರ್ವಜನಿಕರೊಂದಿಗೆ ಮುಕ್ತವಾಗಿ, ಸ್ನೇಹಮಯಿಗಳಾಗಿ ನಡೆದುಕೊಳ್ಳುವುದು ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳ ಜವಾಬ್ದಾರಿ. ದೂರುಗಳನ್ನು ಮುಕ್ತವಾಗಿ ಆಲಿಸಿ. ಜನರು ಭಯ ಭೀತರಾಗುವಂತೆ ನಡೆದುಕೊಳ್ಳಬೇಡಿ. ಸಮಾಜದ ನೆಮ್ಮದಿ ಕಾಪಾಡಲು ಪೊಲೀಸ್ ಅಧಿಕಾರಿಗಳ ಕಾರ್ಯಕ್ಷಮತೆ ಬಹಳ ಮುಖ್ಯ ಎಂಬ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅಪರಾಧಗಳ ಪ್ರಮಾಣ ಕಡಿಮೆ ಆಗಿದೆ:
ಕಳೆದ 2 ವರ್ಷಗಳಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಕೊಲೆ, ದರೋಡೆ, ಮನೆ ಗಳ್ಳತನ ಸೇರಿ ಇತರೆ ಅಪರಾಧಗಳು ಕಡಿಮೆ ಆಗಿರುವುದನ್ನು ಇಲಾಖೆ ಕೊಟ್ಟಿರುವ ಅಂಕಿ ಅಂಶಗಳಿಂದ ಗೊತ್ತಾಗಿದೆ. ಆದರೆ, ಆರೋಪ ಪಟ್ಟಿಯನ್ನು ಸೂಕ್ತ ಸಮಯಕ್ಕೆ ಸಲ್ಲಿಸುವ ಜೊತೆಗೆ FIR ಅನ್ನು ತಕ್ಷಣ ದಾಖಲಿಸಬೇಕು, ತನಿಖೆಯ ಗುಣಮಟ್ಟ ಹೆಚ್ಚಿಸಬೇಕು ಎಂಬ ಸೂಚನೆಗಳನ್ನು ಸಭೆಯಲ್ಲಿ ನೀಡಲಾಗಿದೆ ಎಂದು ತಿಳಿಸಿದರು.
ಅಪರಾಧಿಗಳನ್ನು ಕ್ಷಿಪ್ರವಾಗಿ ಪತ್ತೆಹಚ್ಚಲು ಸೂಚನೆ :
ಅಪರಾಧ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸೂಕ್ತವಾಗಿ, ಪರಿಣಾಮಕಾರಿಯಗಿ, ಸರಿಯಾದ ಸಮಯಕ್ಕೆ ಸಲ್ಲಿಸದಿರುವುದೂ ದೊಡ್ಡ ವೈಫಲ್ಯ. ಇಂಥಾದ್ದನ್ನು ಸಹಿಸಲು ಸಾಧ್ಯವಿಲ್ಲ ಅಪರಾಧ ಪ್ರಕರಣಗಳು ಗಮನಕ್ಕೆ ಬಂದ ತಕ್ಷಣ ಅಗತ್ಯ ಕಾನೂನು ಕ್ರಮ ಕೈಗೊಂಡು,,ತಕ್ಷಣ ಅಪರಾಧಿಗಳನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದರೆ, ಇವುಗಳ ಪತ್ತೆಯ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ತನಿಖೆಯ ಗುಣಮಟ್ಟ ಹೆಚ್ಚಿಸುವ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಹಿರಿಯ ಅಧಿಕಾರಿಗಳು ಅಗಿಂದಾಗ್ಗೆ ಠಾಣೆಗಳಿಗೆ ಭೇಟಿ ಮಾಡಿ:
ಹಿರಿಯ ಅಧಿಕಾರಿಗಳು ಪೊಲೀಸ್ ಠಾಣೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಚೇರಿಗಳಲ್ಲೇ ಕುಳಿತಿರಬಾರದು. ತಮ್ಮ ಕೆಳ ಹಂತದ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಪರಿಶೀಲನೆ ಮಾಡಬೇಕು. ಹೀಗಾದಲ್ಲಿ ಎಲ್ಲರೂ ತಮ್ಮಕೆಲಸಗಳನ್ನು ನಿಷ್ಠಿಯಿಂದ ನಿಭಾಯಿಸುವರು. ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಹಿರಿಯ ಅಧಿಕಾರಿಗಳಿಂದ ಕಿರಿಯ ಸಿಬ್ಬಂದಿವರೆಗೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಪ್ರಕರಣದ ತನಿಖೆಯಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ತಿಳಿಸಿದರು.
ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಕ್ರಮ ವಹಿಸಿ:
ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಅಗತ್ಯ ಎಲ್ಲಾ ಕ್ರಮ ಕೈಗೊಳ್ಳಬೇಕು. ಡ್ರಗ್ ಮಾರುವವರ ಅಂಗಡಿ, ವ್ಯಾಪಾರದ ಲೈಸೆನ್ಸ್ ರದ್ದುಗೊಳಿಸುವ ಅಗತ್ಯ ಬಿದ್ದರೆ ರದ್ಡು ಮಾಡುವಂತೆ ಸೂಚನೆ ನೀಡಲಾಗಿದೆ.
ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ತೆಗೆದು ಕೊಳ್ಳಬೇಕು. ಇತ್ತೀಚೆಗೆ ಕೋಮು ಘರ್ಷಣೆ ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ ಅವರು ಯಾರೇ ಇದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ರೈತರು, ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ವಿರುದ್ಧ ದೌರ್ಜನ್ಯಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಬಾಲ್ಯವಿವಾಹ, ಪೋಕ್ಸೋ, ಅತ್ಯಾಚಾರ, ಭ್ರೂಣಹತ್ಯೆಗಳನ್ನು ನೂರಕ್ಕೆ ನೂರು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜೊತೆ ಸೇರಿ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಖಾಲಿ ಹುದ್ದೆಗಳನ್ನು ತುಂಬಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದೆ:
ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು, ಒಳ ಮೀಸಲಾತಿ ಬಳಿಕ ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇದಕ್ಕೆ ತಕ್ಕ ಸಿದ್ಧತೆ ಮಾಡಿಕೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಹಾಗೂ ಪೊಲೀಸ್ ಇಲಾಖೆಗೆ ಅಗತ್ಯವಾದ ಸವಲತ್ತುಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.