ಬೆಂಗಳೂರು(www.thenewzmirror.com): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕಟವಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಭಾರಿ ಹಿನ್ನಡೆಯಾಗಿದೆ. ತಮಗೆ ಹಂಚಿಕೆ ಮಾಡಲಾದ ಖಾತೆಯ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿರುವ ಹಿರಿಯ ಮುತ್ಸದ್ದಿ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.
ಗುರುವಾರ ತಡರಾತ್ರಿ ಮುಖ್ಯಮಂತ್ರಿಗಳು ಖಾತೆಗಳನ್ನು ಹಂಚಿಕೆ ಮಾಡಿದ್ದರು. ಇದರಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ (ಜಲಸಂಪನ್ಮೂಲ) ಖಾತೆಯನ್ನು ನೀಡಲಾಗಿತ್ತು. ಆದರೆ, ಈ ಖಾತೆಯನ್ನು ವಹಿಸಿಕೊಳ್ಳಲು ನಿರಾಕರಿಸಿರುವ ಅವರು, ಇಂದು (ಜೂನ್ 5) ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಅಸಮಾಧಾನಕ್ಕೆ ಮುಖ್ಯ ಕಾರಣವೇನು?
ರಾಮಲಿಂಗಾರೆಡ್ಡಿ ಅವರು ಮೊದಲಿನಿಂದಲೂ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಆಕಾಂಕ್ಷಿಯಾಗಿದ್ದರು. 2023 ರಲ್ಲಿಯೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದಾಗ ಈ ಖಾತೆ ನೀಡುವುದಾಗಿ ಭರವಸೆ ನೀಡಿದ್ದರು ಎಂದು ರೆಡ್ಡಿ ತಿಳಿಸಿದ್ದಾರೆ. ಆದರೆ, ಈಗ ಆ ಖಾತೆಯನ್ನು ಕೃಷ್ಣ ಬೈರೇಗೌಡ ಅವರಿಗೆ ನೀಡಿ, ತಮಗೆ ನೀರಾವರಿ ಖಾತೆ ನೀಡಿರುವುದಕ್ಕೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
‘ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ’
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, “ನನಗೆ ಪದೇ ಪದೇ ಪಕ್ಷದಲ್ಲಿ ಅವಮಾನ ಮಾಡಲಾಗುತ್ತಿದೆ. ಕೊಟ್ಟ ಮಾತು ತಪ್ಪಿದ ಜಾಗದಲ್ಲಿ ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಾನು ಸಚಿವನಾಗಿ ಮುಂದುವರಿಯಲು ಸಾಧ್ಯವಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು. ತಮ್ಮ ರಾಜೀನಾಮೆ ಪತ್ರವನ್ನು ನೇರವಾಗಿ ಮುಖ್ಯಮಂತ್ರಿಗಳಿಗೆ ನೀಡದೆ, ವೈಯಕ್ತಿಕ ಕಾರ್ಯದರ್ಶಿ ಮೂಲಕ ಸಿಎಂ ಕಚೇರಿಗೆ ರವಾನಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ನಲ್ಲೇ ಮುಂದುವರಿಕೆ
ಸಚಿವ ಸ್ಥಾನ ತೊರೆದರೂ ತಾವು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ನಾನು ಕಳೆದ 53 ವರ್ಷಗಳಿಂದ ಕಾಂಗ್ರೆಸ್ನಲ್ಲಿದ್ದೇನೆ. ಕೇವಲ ಶಾಸಕನಾಗಿ ಮುಂದುವರಿದು ಜನರ ಸೇವೆ ಮಾಡುತ್ತೇನೆ” ಎಂದಿದ್ದಾರೆ.
ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಎಂಟು ಬಾರಿ ಶಾಸಕರಾಗಿರುವ ಹಿರಿಯ ನಾಯಕರೊಬ್ಬರು ರಾಜೀನಾಮೆ ನೀಡಿರುವುದು ಕೈ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿ, “ರೆಡ್ಡಿ ನನ್ನ ಆಪ್ತ ಸ್ನೇಹಿತರು, ಅವರ ಮನವೊಲಿಸಲು ಪ್ರಯತ್ನಿಸುತ್ತೇನೆ” ಎಂದು ತಿಳಿಸಿದ್ದಾರೆ.







