ಶಿವಮೊಗ್ಗ(www.thenewzmirror.com): ಶಿವಮೊಗ್ಗ-ಉಡುಪಿ ಗಡಿಭಾಗದ ತೀರ್ಥಹಳ್ಳಿ ಸಮೀಪದ ಹುಲಿಕಲ್ ಘಾಟ್ನಲ್ಲಿ ಚಲಿಸುತ್ತಿದ್ದ ಖಾಸಗಿ ಪ್ರಯಾಣಿಕರ ಬಸ್ಸೊಂದರಲ್ಲಿ ಏಕಾಏಕಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಹಾಗೂ ಚಾಲಕ ಮಂಡಳಿ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಬಸ್ ಹುಲಿಕಲ್ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣ ಬೆಳೆಸುತ್ತಿದ್ದಾಗ ಈ ಘಟನೆ ನಡೆದಿದೆ.
ಚಾಲಕನ ಸಮಯಪ್ರಜ್ಞೆ:
ಘಾಟ್ ರಸ್ತೆಯ ತಿರುವಿನಲ್ಲಿ ಚಲಿಸುತ್ತಿದ್ದಾಗ ಬಸ್ನ ಇಂಜಿನ್ ಭಾಗದಲ್ಲಿ ದಿಢೀರನೆ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಚಾಕಚಕ್ಯತೆಯಿಂದ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ, ಅದರಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಯುವಂತೆ ಸೂಚಿಸಿದ್ದಾನೆ. ಪ್ರಯಾಣಿಕರೆಲ್ಲರೂ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಇಡೀ ಬಸ್ಗೆ ಬೆಂಕಿ ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ವಾಹನ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಶಂಕೆ:
ಮೂಲಗಳ ಪ್ರಕಾರ, ಬಸ್ನ ಇಂಜಿನ್ನಲ್ಲಿ ಉಂಟಾದ ತಾಂತ್ರಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್ (Short Circuit) ಈ ಅಗ್ನಿ ದುರಂತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದಾಗಿ ಘಾಟ್ ರಸ್ತೆಯ ಸಂಚಾರದಲ್ಲಿ ಕೆಲಕಾಲ ಭೀತಿ ಹಾಗೂ ದಟ್ಟಣೆ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಪರ್ಯಾಯ ವಾಹನದ ಮೂಲಕ ಕಳುಹಿಸಿಕೊಡಲಾಗಿದೆ.
ಮೂರು ತಿಂಗಳ ಹಿಂದೆ ಇಂತದ್ದೇ ದುರಂತ!
ಕೇವಲ ಮೂರು ತಿಂಗಳ ಹಿಂದಷ್ಟೇ, 2026ರ ಫೆಬ್ರವರಿ 28ರ ಶನಿವಾರದಂದು, ಇದೇ ಹುಲಿಕಲ್ ಘಾಟಿಯ ಮುಖ್ಯ ರಸ್ತೆಯ ಬಾಳೇಬರೆ ಫಾಲ್ಸ್ ಬಳಿ ಉಡುಪಿ-ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಇದೇ ರೀತಿ ಏಕಾಏಕಿ ಎಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಆ ಬಸ್ಸಿನಲ್ಲಿದ್ದ 38 ಪ್ರಯಾಣಿಕರು ಸಹ ಚಾಲಕ ಮತ್ತು ನಿರ್ವಾಹಕರ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.







