ಬೆಂಗಳೂರು(www.thenewzmirror.com): ಕುಡಿಯುವ ನೀರಿಗೆ ಸಂಬಂಧಿಸಿದ ಹಾಗೂ ಇನ್ನಿತರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಭೂಮಿ ವಶಪಡಿಸಿಕೊಳ್ಳುವ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಸಿಇಒಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಗಳ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಜಲಜೀವನ್ ಮಿಷನ್ ಕಾರ್ಯಕ್ರಮದಡಿ ರಾಜ್ಯದಾದ್ಯಂತ ಮನೆ ಮನೆಗೆ ನೀರು ಕೊಡುವ ಕಾಮಗಾರಿಗಳು ಭರದಿಂದ ಸಾಗಿದ್ದು, ಈ ಯೋಜನೆಗಾಗಿ ಮಂಜೂರು ಮಾಡಲಾದ ಅನುದಾನವನ್ನು ಪೂರ್ಣವಾಗಿ ಬಳಸಿಕೊಳ್ಳಲಾಗಿದೆ, ರಾಜ್ಯದಾದ್ಯಂತ ಈ ಯೋಜನೆಯನ್ನು ಇನ್ನು ಎರಡರಿಂದ ಮೂರು ವರ್ಷಗಳ ಕಾಲಮಿತಿಯಲ್ಲಿ ಅನುಷ್ಠಾನ ಮಾಡಲಾಗುವುದು ಎಂದರು.
ಸುಸ್ಥಿರ ನೀರಿನ ಮೂಲಗಳಿಂದ ನೀರು ಸರಬರಾಜು ಮಾಡಲಾಗುತ್ತಿದ್ದು, ಇದು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತಿದೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿಗಳು ನಡೆದಿದ್ದು, ಅದನ್ನು ಸರಿಪಡಿಸಲು ಸಹ ಹೆಚ್ಚು ಸಮಯ ಹಿಡಿಯುತ್ತಿದೆ ಎಂದು ಸಚಿವರು ಹೇಳಿದರು. ಈ ಸಂಬಂಧ ನಡೆದ ಚರ್ಚೆಯಲ್ಲಿ ನೀರು ಸಂಪರ್ಕ ನೀಡಲು ಕೆಲವೆಡೆ ರಸ್ತ ಅಗೆಯಲಾಗಿದ್ದು, ಹಾಳಾಗಿರುವ ರಸ್ತೆಗಳನ್ನು ಟೆಂಡರುದಾರರನ್ನೇ ಹೊಣೆಗಾರರನ್ನಾಗಿಸಿ ರಸ್ತೆಗಳನ್ನು ಸುಸ್ಥಿತಿಗೆ ತರಲಾಗುವುದು ಎಂದೂ ಸಚಿವರು ಹೇಳಿದರು.
ಕಾಮಗಾರಿಗಳ ಲೋಪ ಕುರಿತಂತೆ ಪತ್ರಿಕೆಗಳಲ್ಲಿ ಪ್ರಕಟವಾಗುವ ಸುದ್ದಿಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ನೀಡಿದ ಸಲಹೆಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಪಂಚಾಯತಿ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಲಾಗಿದ್ದು, ಪರ್ತಿ ನಿತ್ಯ ಪ್ರಕಟವಾಗುವ ದೂರುಗಳನ್ನು ಗಮನಿಸಿ ವಾರ್ತಾ ಇಲಾಖೆಯ ಮೂಲಕ ಸ್ಪಷ್ಟನೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.